ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ ರಾಜ್ಯ ಹವಾಮಾನ ಇಲಾಖೆ. ಉತ್ತರ ಕರ್ನಾಟಕ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಆಗಿದೆ. ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬಳ್ಳಾರಿ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಆಗಿದೆ. ಗಾಳಿಯ ವೇಗವೂ ಇರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ಕೊಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕು ಹಾಗು ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.

ನಿರಂತರ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲೂ ಭಾರೀ ಮಳೆಯಾಗ್ತಿದೆ. ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ವ್ಯಾಪಕ ಮಳೆ ಆಗ್ತಿರೋದ್ರಿಂದ ತುಂಗಾ ನದಿ ಉಕ್ಕಿ ಹರೀತಿದ್ದು, ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಇದರ ಪರಿಣಾಮ ಹತ್ತಾರು ಎಕರೆ ಅಡಿಕೆ ತೋಟ ಜಲಾವೃತವಾಗಿದೆ. ಮತ್ತೂರಿನಲ್ಲಿ ತೋಟಗಳಿಗೆ ಮಳೆ ನೀರು ನುಗ್ಗಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಭಯದಲ್ಲಿ ಗ್ರಾಮಸ್ಥರಿದ್ದಾರೆ. ಶಿವಮೊಗ್ಗದ ಪ್ರಸಿದ್ಧ ರಾಮಮಂಟಪ ಮುಳುಗಡೆ ಆಗಲು ಕೆಲವೇ ಅಡಿಗಳು ಮಾತ್ರ ಬಾಕಿ ಇದೆ. ತುಂಗಾ ನದಿಯಲ್ಲಿರುವ ಪ್ರಸಿದ್ಧ ರಾಮಮಂಟಪ ಈ ವರ್ಷ ಒಮ್ಮೆಯೂ ಮುಳುಗಡೆ ಆಗಿರಲಿಲ್ಲ. ಆದ್ರೀಗ ಮಹಾಮಳೆಗೆ ಮುಳುಗುವ ಭೀತಿ ಶುರುವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮಳೆಯಾಗ್ತಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಅನಾಹುತಗಳು ಹೆಚ್ಚಾಗುತ್ತಿವೆ. ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗೃತ ಕ್ರಮವಾಗಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲಾ ಡಿಸಿ ಲಕ್ಷ್ಮಿ ಪ್ರಿಯಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕೋಲಾರ ನಗರ ಹಾಗೂ ಮಾಲೂರು ಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದೆ. ನಿನ್ನೆ ಸಂಜೆ 1 ಗಂಟೆಗಳ ಕಾಲ ಎಡೆಬಿಡದೆ ಸುರಿದ ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಜೋರು ಮಳೆಗೆ ರಸ್ತೆಗಳೆಲ್ಲಾ ಜಲಾವೃತವಾಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಅಷ್ಟೇ ಅಲ್ಲದೆ ಮಳೆಯಿಂದ ಹಲವೆಡೆ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗಿತ್ತು.


