ಹಾಸನ: ದಸರಾ ಉದ್ಘಾಟನೆಗೆ ತಮ್ಮ ಹೆಸರನ್ನು ಆಯ್ಕೆ ಮಾಡಿದ ನಂತರ ಅಪಸ್ವರ ಎದ್ದಿರುವುದಕ್ಕೆ ಸಾಹಿತಿ ಬಾನು ಮುಷ್ತಾಕ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನು ಏನು ಮಾತನಾಡಲ್ಲ ಎನ್ನುತ್ತಲೇ ಅಪಸ್ವರ ಎತ್ತಿದವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೋಟ್ಯಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು. ಅದರ ಅಗತ್ಯ ಇಲ್ಲ ಎನ್ನಿಸುತ್ತದೆ. ಪ್ರತಿಕ್ರಿಯೆಯನ್ನು ಜನರೇ ಕೊಡುತ್ತಾರೆ ಎಂದು ಹೇಳಿದ್ದೇನೆ. ವಿರೋಧ ಪಕ್ಷ, ಆಡಳಿತ ಪಕ್ಷ ಇರಬೇಕು, ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು. ಯಾವುದರಲ್ಲಿ ರಾಜಕೀಯ ಮಾಡಬಾರದು ಅನ್ನೊ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕಾಗುತ್ತದೆ ಎನ್ನುವ ಮೂಲಕ ಪರೋಕ್ಷವಾಗಿ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ ಸಾಹಿತಿ ಬಾನು ಮುಷ್ತಾಕ್.

ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ ಎಂದಿರುವ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್, ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬುಕರ್ ಅಂತಹ ಪ್ರಶಸ್ತಿ ಸಿಗೋದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಅದರ ಬಗ್ಗೆ ನನಗೆ ಬೇಜಾರಿಲ್ಲ ಮಾತಾಡಲಿ. ಅವರವರ ಮಟ್ಟಕ್ಕೆ ತಕ್ಕಹಾಗೆ ಮಾತಾಡ್ತಾರೆ ಮಾತಾಡಲಿ. 2023 ರಲ್ಲಿ ಜನ ಸಾಹಿತ್ಯ ಸಮ್ಮೇಳನದದಲ್ಲಿ ನಾನು ಆಡಿದ ಮಾತಿನ ತುಣುಕು ಹಾಕಿ, ನನ್ನ ವಿರುದ್ಧ ಕೆಲವರು ಆರೋಪ ಮಾಡಿದ್ದಾರೆ. ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನ ದೂರ ಇಟ್ಟಿದ್ದಕ್ಕೆ ಆಯೋಜನೆಗೊಂಡಿದ್ದ ಸಮ್ಮೇಳನ ಅದು ಎಂದು ಸ್ಪಷ್ಟನೆ ನೀಡಿದ್ದಾರೆ. ಅದರ ಅಧ್ಯಕ್ಷತೆ ವಹಿಸಿ ನಾನು ಮಾತಾಡಿದ್ದೇನೆ ಎಂದಿದ್ದಾರೆ.

ನನಗೆ ನೇರವಾಗಿ ಕನ್ನಡ ಸಾಹಿತ್ಯ, ಕನ್ನಡ ಸಂಸ್ಕೃತಿ ಬಗ್ಗೆ ಮುಸ್ಲಿಂ ಅಲ್ಪ ಸಂಖ್ಯಾತರು, ದಲಿತರು, ಮಹಿಳೆಯರು ದನಿಯಾಗಿ ಮಾತಾಡಿದ್ದೇನೆ. ಅದರಲ್ಲಿ ಹೇಳಿರೊ ವಿಚಾರ ಎಲ್ಲರಿಗೂ ಅರ್ಥ ಆಗಿದೆ. ಕನ್ನಡಿಗರ ಕುರಿತಂತೆಯು ಕಾವ್ಯ ಪರಿಣಿತ ಮತಿಗಳ ಕೆಲವು ಸಂಕೇತಗಳನ್ನು ನಾನು ಹೇಳಿದ್ದೇನೆ. ಕನ್ನಡವನ್ನು ಭಾಷೆಯಾಗಿ ಬಳಸಲು ಬದಲಾಗಿ ಭಾವುಕವಾಗಿ ಪರಿಗಣಿಸಿದ್ದೀರಿ. ದೇವತೆಯಾಗಿ ಮಾಡಿ ಮಂದಾಸನದಲ್ಲಿ ಇದ್ದಾಗ ಅದಕ್ಕೆ ಕೈಮುಗಿದು ಬಂದರೆ ಮುಗೀತು. ಭಾಷೆಯನ್ನು ಭಾಷೆಯಾಗಿ ಪರಿಗಣಿಸಿದಾಗ ನಾನು ನೀವು ಎಲ್ಲರು ಓದಬೇಕಾಗುತ್ತದೆ. ಈ ರೀತಿ ಭಾಷೆಯನ್ನು ಪ್ರಶ್ನೆ ಮಾಡಬೇಡಿ, ಅದನ್ನ ನಮ್ಮ ಭಾಷೆಯನ್ನಾಗಿ ನಾವು ಬಳಸೋಣ. ಹಾವೇರಿ ಸಮ್ಮೇಳನದಿಂದ ದೂರ ಇಟ್ಟಿರುವ ಅನೇಕ ಅಲ್ಪ ಸಂಖ್ಯಾತರು ಎಲ್ಲಿ ನಿಲ್ಲಬೇಕು ಅನ್ನೋ ಅರ್ಥದಲ್ಲಿ ಮಾತನಾಡಿದ್ದೇನೆ ಎಂದಿದ್ದಾರೆ.

ನಾವು ದೂರ ನಿಲ್ಲಬಾರದು ಹತ್ರಿರ ನಿಲ್ಲಿ ಅನ್ನೊ ಆತ್ಮವಿಶ್ವಾಸದ ಸಂಕೇತವಾಗಿ ಹೇಳಿದ್ದೀನಿ. ಗೋಕಾಕ್ ಸಮಿತಿ ವರದಿ ಬಂದಾಗ ಹಾಸನದಲ್ಲಿ ದೊಡ್ಡ ಕಾರ್ಯಕ್ರಮ ನಡೆದಿತ್ತು. ಸಾಮಾನ್ಯ ಮಹಿಳೆಯಾಗಿ ಹೋಗಿದ್ದ ನಾನು, ಅಲ್ಲಿ ಮಾತನಾಡಲು ಯಾರು ತಮ್ಮ ಮಕ್ಕಳನ್ನ ಕನ್ನಡ ಶಾಲೆಗೆ
ಕಳಿಸುತ್ತಿದ್ದೀರೊ ಅವರು ಮಾತ್ರ ಮಾತನಾಡಿ ಎಂದಿದ್ದರು. ಆಗ ಮಾತನಾಡಿದ ಏಕೈಕ ಮಹಿಳೆ ನಾನು. ವೇದಿಕೆಗೆ ಬಂದವಳು ನಾನೊಬ್ಬಳೆ
ಯಾಕೆಂದರೆ ನನ್ನ ಮೂವರು ಹೆಣ್ಣು ಮಕ್ಕಳು ಕನ್ನಡ ಶಾಲೆಯಲ್ಲಿ ಓದುತ್ತಿದ್ದರು. ಹಾಗಾಗಿ ನಾನು ಅಂದಿನ ಸಭೆಯಲ್ಲಿ ಮಾತನಾಡಿಧ್ದು ನಾನು ಮಾತ್ರ. ಹಾಗಾಗಿ ನಾನು ಹೇಳಿದ ಮಾತು ತಿರುಚೊ ಅಗತ್ಯ ಇಲ್ಲ. ಮಾತನ್ನ ಸಹೃದಯದಿಂದ ಅರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಬಾನು ಮುಷ್ತಾಕ್ ವಿರೋಧ ಮಾಡಿದವರಿಗೂ ಟಾಂಟ್ ಕೊಡುತ್ತಲೇ ನಸುನಕ್ಕಿದ್ದಾರೆ.


