ಎಸ್ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಭೇಟಿ ಮಾಡಿ ಸಚಿವರ ನಿಯೋಗ ಮನವಿ ಮಾಡಿತ್ತು. ಒಳ ಮೀಸಲಾತಿ ಗೊಂದಲದಿಂದ ನೇಮಕಾತಿ ವಿಳಂಬ ಆಗ್ತಿದೆ ಅನ್ನೋ ಕಾರಣಕ್ಕೆ ರಾಜ್ಯಪಾಲರನ್ನ ಭೇಟಿ ಮಾಡಿದ್ದ ಸಚಿವರ ನಿಯೋಗ ಸಹಿ ಹಾಕುವಂತೆ ಕೇಳಿಕೊಂಡಿತ್ತು. ಸಚಿವರ ನಿಯೋಗಕ್ಕೆ ಸಹಿ ಹಾಕುವ ಭರವಸೆ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕಿದ್ದಾರೆ. 18 ಜಾತಿಗಳ ಎಡಗೈ ಸಮುದಾಯಕ್ಕೆ ಶೇಕಡ 6 ರಷ್ಟು ಮೀಸಲಾತಿ, 20 ಜಾತಿಗಳು ಇರುವ ಬಲಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ ಹಾಗೂ ಇತರೆ ಸಮುದಾಯಗಳಾದ ಬಂಜಾರ, ಭೋವಿ, ಕೊರಚ, ಕೊರಮ, ಅಲೆಮಾರಿಗಳು ಶೇಕಡ 5ರಷ್ಟು ಮೀಸಲಾತಿ ನೀಡಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ ಪಾಟೀಲ್ ಮಾತನಾಡಿ, 56,432 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.. 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ತೀರ್ಮಾನ ಮಾಡಿದ್ದು, ಎಲ್ಲಾ ಇಲಾಖೆಗಳಿಗೂ ಈ ಸಂಬಂಧ ಸೂಚನೆ ಕೊಡಲಾಗಿದೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಒಳ ಮೀಸಲಾತಿ ಪ್ರಮಾಣದ ಬಗ್ಗೆ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.. ಹೈಕೋರ್ಟ್ ಶೇಕಡ 56 ಮೀಸಲಾತಿ ಹೆಚ್ಚಳಕ್ಕೆ ತಡೆ ಕೊಟ್ಟಿದೆ. ಆದರೂ ನೇಮಕಾತಿ ಪ್ರಕ್ರಿಯೆ ಆರಂಭಿಸಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ. ಇತ್ತೀಚಿಗಷ್ಟೇ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು.
ಉದ್ಯೋಗ ನೇಮಕಾತಿಗೆ ಚಾಲನೆ ನೀಡಲು ಸರ್ಕಾರ ನಿರ್ಧಾರ ಮಾಡಿದ್ದು, ಶೇಕಡ 50ರಷ್ಟು ಮೀಸಲಾತಿ ನಿಗದಿಗೊಳಿಸಿ ನೇಮಕಾತಿಗೆ ಚಾಲನೆ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಶೇಕಡ 56ರಷ್ಟು ಮೀಸಲಾತಿಗೆ ಹೈಕೋರ್ಟ್ನಲ್ಲಿ ತಡೆ ಇರುವ ಕಾರಣಕ್ಕೆ ಶೇಕಡ 56ರ ಬದಲು, ಶೇಕಡ 50 ರಷ್ಟು ಮೀಸಲಾತಿ ಅಡಿಯಲ್ಲೇ ನೇಮಕಾತಿ ಮಾಡಲು ನಿರ್ಧಾರ ಮಾಡಲಾಗಿದೆ.


