ಇಂದು ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಎರಡು ಜಿಲ್ಲೆಗೆ ರೆಡ್ ಅಲರ್ಟ್ ಹಾಗೂ ಏಳು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಉಳಿದಂತೆ 22 ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಿದೆ ಹವಾಮಾನ ಇಲಾಖೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಆಗಿದ್ದು, ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ಹಾವೇರಿ
ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಇನ್ನೂ ಮಳೆ ಅಬ್ಬರ ಹೆಚ್ಚಾಗಿ ಸಮಸ್ಯೆ ಆಗದೆ ಇರಲಿ ಅನ್ನೋ ಕಾರಣಕ್ಕೆ ಸಾಕಷ್ಟು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಮಕ್ಕಳಿಂದ ಹಿಡಿದು ದ್ವಿತೀಯ ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದ ಮುಂಜಾಗ್ರತ ಕ್ರಮವಾಗಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಆಗಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಳೆದ 3 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವರುಣಾರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ರಜೆ ಘೋಷಿಸಿ ಆದೇಶಿಸಿದ್ದಾರೆ. ಭಾಲ್ಕಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಬಳಿ ಮಾಂಜ್ರಾ ನದಿಯ ದಡದಲ್ಲಿರುವ ಶಿವನ ದೇಗುಲ ಸಂಪೂರ್ಣ ಮುಳುಗಡೆಯಾಗಿದೆ. ಇಂಚೂರ ಸೇತುವೆಯೂ ಮುಳುಗಡೆಯಾಗಿದ್ದು, ಸಂಚಾರ ಸ್ಥಗಿತ ಆಗಿರೋದ್ರಿಂದ ಸಾರ್ವಜನಿಕರು ಪರದಾಟ ನಡೆಸ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿದ್ದು, ಬಿಟ್ಟು ಬಿಡದೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯುಸಿ ತನಕ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಒಟ್ಟಾರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಂಭವ ಹೆಚ್ಚಾಗಿದೆ. ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳ ರಜೆ ಬಗ್ಗೆ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ನಿರ್ಧಾರ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.


