ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಡಲಾಗಿದೆ. ಬೆಂಗಳೂರಿಗೆ ಇನ್ನೂ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡು, ಕರಾವಳಿ ಪ್ರದೇಶದ ಬಹುತೇಕ ಕಡೆ ಜೋರು ಮಳೆ ಆಗುವ ಮುನ್ಸೂಚನೆ ಕೊಡಲಾಗಿದೆ. ಗುಡುಗು ಮಿಂಚು ಸಹಿತ ಮಳೆ ಆಗಲಿದ್ದು, ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ , ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಸುರಿಯಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.,
ಬಿಸಿಲ ಬೇಗೆಯಿಂದ ಬಸವಳಿದಿದ್ದ ರಾಜ್ಯದ ಮೇಲೆ ವರುಣ ಕೊನೆಗೂ ಕೃಪೆ ತೋರಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಮಳೆಯಿಂದ ಮರಗಳು ರಸ್ತೆಗುರುಳಿ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಶಿವಮೊಗ್ಗ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿದಿದೆ. ತೀರ್ಥಹಳ್ಳಿ ಸುತ್ತ ಮತ್ತ ಗುಡುಗು ಸಹಿತ ಮಳೆ ಸುರಿದಿದೆ. ಸಂಜೆ ವೇಳೆಗೆ ಮಳೆ ಸುರಿದ ಪರಿಣಾಮ ವಾಹನ ಸವಾರರ ಪರದಾಡಿದ್ರು. ತೀರ್ಥಹಳ್ಳಿಯ ಜೂನಿಯರ್ ಕಾಲೇಜ್ ಬಳಿ ಕಾರಿನ ಮೆಲೆ ಮರ ಬಿದ್ದು ಜಖಂ ಆಗಿದೆ.

ಕೊಪ್ಪಳದಲ್ಲಿ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿದೆ. ಕೊಪ್ಪಳ ತಾಲೂಕಿನ ಮುದ್ದಾಬಳ್ಳಿಯಲ್ಲಿ ಗಾಳಿಯ ರಭಸಕ್ಕೆ ಮರಗಳು ಧರೆಗುರುಳಿವೆ. ಮರ ಉರುಳಿ ಬಿದ್ದಿದ್ರಿಂದ ರಸ್ತೆ ಸಂಚಾರವೂ ಬಂದ್ ಆಗಿದ್ದಷ್ಟೇ ಅಲ್ಲದೇ ವಾಹನಗಳು ಜಖಂ ಆಗಿವೆ. ಜೆಸಿಬಿಯಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಬಾಳೆ ಬೆಳೆ ನಾಶವಾಗಿದೆ.. ಎರಡು ಎಕರೆಯಲ್ಲಿ ದೇವಪ್ಪ ಹೊಸಮನಿ ಎಂಬುವರು ಬೆಳೆದ ಬಾಳೆ ಸಂಪೂರ್ಣ ಹಾಳಾಗಿದೆ. ಇನ್ನೂ ಕೊಪ್ಪಳದ ಹೊಸಹಳ್ಳಿ ಗ್ರಾಮದಲ್ಲಿ ಹುಲಿಗೆವ್ವ ನಿಂಗಪ್ಪ ಇಟಗಿ ಎನ್ನುವರರಿಗೆ ಸೇರಿದ ಬಾಳೆ ತೋಟ ನಾಶವಾಗಿದೆ. ಪೂರ್ವ ಮುಂಗಾರು ಮಳೆಗೆ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನಾಶ ಆಗಿದೆ.

ಮೈಸೂರಿನಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ 2 ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಸಿಡಿಲು ಬಡಿತಕ್ಕೆ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಈ ವೇಳೆ ಅಸ್ವಸ್ಥರಾದ ಮಹಿಳೆ ವಿನೋದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿನೋದ ಸಾವನ್ನಪ್ಪಿದ್ದಾರೆ.


