ರಾಜ್ಯ ಸಂಪುಟ ವಿಸ್ತರಣೆಗೆ ಅಂತಿಮ ಹಂತದ ಕಸರತ್ತು ಜೋರಾಗಿದೆ. ದೆಹಲಿಗೆ ತೆರಳಿರುವ ಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸಚಿವ ಸಂಪುಟದ ಪಟ್ಟಿ ಬಗ್ಗೆ ಚರ್ಚೆ ನಡೆಸಲಿದ್ದು, ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ.

ಇನ್ನು ಸಚಿವರ ಪಟ್ಟಿ ಫೈನಲ್ ಆದರೂ ಪ್ರಮಾಣ ವಚನ ಕಾರ್ಯಕ್ರಮ ವಿಳಂಬ ಆಗುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರವಾಸ ಕೈಗೊಂಡಿದ್ದು, ರಾಜ್ಯದಲ್ಲಿ ಇರುವುದಿಲ್ಲ. ಬೆಂಗಳೂರಿನಿಂದ ನಾಳೆ ಮಧ್ಯಪ್ರದೇಶಕ್ಕೆ ರಾಜ್ಯಪಾಲರು ತೆರಳಲಿದ್ದು, ಹಬ್ಬದ ಹಿನ್ನೆಲೆ ಸ್ವಗೃಹಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಪ್ರದೇಶದಿಂದ ಜುಲೈ 30ರ ರಾತ್ರಿ 11-45ಕ್ಕೆ ವಾಪಸ್ ಆಗಲಿದ್ದಾರೆ. ಹೈಕಮಾಂಡ್ ಸಭೆ ಬಳಿಕ ಸಚಿವರ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ಮುಗಿಸುತ್ತೇನೆ. ಎಲ್ಲವೂ ಶೀಘ್ರದಲ್ಲೇ ಅಂತಿಮವಾಗಲಿದೆ ಅಂತ ಹೇಳಿದ್ದಾರೆ. ಇನ್ನು ಡಿಸಿಎಂ ಪರಮೇಶ್ವರ್ ಮಾತನಾಡಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಒಂದೆರಡು ಸಲ ವರಿಷ್ಠರ ಜತೆ ಚರ್ಚೆ ಆಗಿದೆ. ಇವತ್ತೂ ಸಭೆ ಇದೆ. ವಿಸ್ತರಣೆಗೆ ಅನುಮತಿ ಸಿಕ್ಕರೆ ಶೀಘ್ರವೇ ಸಂಪುಟ ವಿಸ್ತರಣೆಯಾಗೋ ಸಾಧ್ಯತೆ ಇದೆ ಅಂತ ಹೇಳಿದ್ದಾರೆ.
MLC ಸಲೀಂ ಅಹ್ಮದ್ ಸೇರಿದಂತೆ ಸಚಿವಾಕಾಂಕ್ಷಿಗಳು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ತೆರಳೋ ಮುನ್ನ ಮಾತನಾಡಿದ ಸಲೀಂ ಅಹ್ಮದ್, ವಾರದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಅಂತ ಸಿಎಂ ಹೇಳಿದ್ದಾರೆ. ಹಿರಿಯರು ಮತ್ತು ಯುವಕರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ. ಶಾಸಕ ಶಿವಲಿಂಗೇಗೌಡ ಏರ್ಪೋರ್ಟ್ನಲ್ಲಿ ಮಾತನಾಡಿ, ಅನಿವಾರ್ಯ ಕಾರಣದಿಂದ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ. 2-3 ದಿನದಲ್ಲಿ ವಿಸ್ತರಣೆ ಆಗುತ್ತದೆ ಎಂಬ ವಿಶ್ವಾಸವಿದೆ. ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದಿದ್ದಾರೆ.
ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ಭಾರೀ ಕಸರತ್ತು ನಡೆಯುತ್ತಿದೆ. ಖಾಲಿ ಇರುವ 20 ಸ್ಥಾನಗಳಿಗೆ ಬರೋಬ್ಬರಿ 60ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಲಾಬಿ ಮಾಡ್ತಿದ್ದಾರೆ ಎನ್ನಲಾಗಿದೆ. ದೆಹಲಿಯತ್ತ ಮುಖ ಮಾಡಿರುವ ಶಾಸಕರು, ಹೈಕಮಾಂಡ್ ಬಳಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದ್ದು, ನಾಳೆ ಸಭೆ ಇದ್ದು, ಸಭೆ ಬಳಿಕ ನಿರ್ಧಾರ ಮಾಡ್ತಾರೆ. ನಾನು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ನಮಗೇನು ಆಗಲೇಬೇಕಂತೇನಿಲ್ಲ, ಕಾರ್ಯಕರ್ತರಾಗಿ ಕೆಲಸ ಮಾಡ್ತೀನಿ ಎಂದಿದ್ದಾರೆ.


