ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿದೆ ಚೆನ್ನಾಗಿದೆ ಅನ್ನೋದನ್ನು ಇದೊಂದು ಪ್ರಕರಣ ಸಾರಿ ಸಾರಿ ಹೇಳ್ತಿದೆ. ಇತ್ತೀಚಿಗಷ್ಟೇ ನಾಡಹಬ್ಬ ದಸರಾ ಆಚರಣೆ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ಮೈಸೂರು ಇದೀಗ 9 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಿಂದ ಕುಖ್ಯಾತಿ ಪಡೆದುಕೊಂಡಿದೆ. ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಕಾಮುಕ ಕೊಲೆ ಮಾಡಿ ಬಿಸಾಡಿದ್ದಾನೆ. ದಸರಾ ಆಚರಣೆ ವೇಳೆ ಬಲೂನು ಮಾರುತ್ತಿದ್ದ ಬಾಲಕಿ ಕೊಲೆ ನಡೆದಿದೆ. ಮಲಗಿದ್ದ ಮಗುವನ್ನು ಎತ್ತೊಯ್ದು ಅತ್ಯಾಚಾರ ಮಾಡಿ ಕೊಂದು ಹಾಕಿದ್ದಾನೆ.
ಅಮಾಯಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಲ್ಲಿ ಒಂದೇ ದಿನದ ಅಂತರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೆಗಾಲ ಮೂಲದ ಕಾರ್ತಿಕ್ ಎಂಬಾತನನ್ನು ಅರೆಸ್ಟ್ ಮಾಡುವಾಗ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪೊಲೀಸರು ಗಂಡು ಹೊಡೆದು ಬಂಧಿಸಿದ್ದಾರೆ. ಕೊಳ್ಳೆಗಾಲದಲ್ಲೂ ಮಹಿಳೆ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾರ್ತಿಕ್, ಇತ್ತೀಚಿಗಷ್ಟೇ 4 ತಿಂಗಳ ಹಿಂದೆ ಹೈಕೋರ್ಟ್ನಿಂದ ಜಾಮೀನು ಪಡೆದು ಹೊರಬಂದಿದ್ದ. ಮದ್ಯ ವ್ಯಸನಿ ಆರೋಪಿ, ಬಾಲಕಿಯನ್ನು ಕೊಂದಿದ್ದಾನೆ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ನಾಗರಿಕ ಸಮಾಜ ಇಂತಹ ಹೀನ ಕೃತ್ಯಗಳನ್ನು ಖಂಡಿಸಬೇಕು ಎಂದಿದ್ದಾರೆ. ಮೈಸೂರಿನ ಸಾಲು ಸಾಲು ಅಪರಾಧ ಕೃತ್ಯಗಳ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ಪೊಲೀಸರ ಕೈ ಕಟ್ಟಿ ಹಾಕಿರುವ ರಾಜಕಾರಣಿಗಳು, ಪ್ರೊಟೊಕಾಲ್, ಸೆಲ್ಯೂಟ್ಗಷ್ಟೇ ಸೀಮಿತಗೊಳಿಸಿದ್ದಾರೆ ಅಂತಾ ಟೀಕಿಸಿದ್ದಾರೆ. ಹಾಲಿ ಸಂಸದ ಯದುವೀರ್ ಒಡೆಯರ್ ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ಬಗ್ಗೆ ಪ್ರತಿಪಕ್ಷ ನಾಯಕರ ಆರ್. ಅಶೋಕ್ ಹಾಗೂ ಬಿಜೆಪಿ ಎಂಎಲ್ಸಿ ಸಿ ಟಿ ರವಿ ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕ ಆಕ್ರೋಶದ ನಡುವೆ ತವರಿನಲ್ಲಿ ಆಗ್ತಿರೋ ಅಪರಾಧ ಪ್ರಕರಣಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ಸರಣಿ ಕೊಲೆ, ಅತ್ಯಾಚಾರ, ಹದಗೆಟ್ಟ ಕಾನೂನು ಸುವ್ಯವಸ್ಥೆ ಬಗ್ಗೆ ಇವತ್ತು ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಕೊಲೆ, ಅತ್ಯಾಚಾರ ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದು, ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಕೈಗೊಳ್ಳಬೇಕಾದ ವಿಚಾರಗಳ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಿದ್ದಾರೆ. ಸಂಜೆ 7.30ಕ್ಕೆ ಸಭೆ ನಿಗದಿಯಾಗಿದ್ದು, ಅಧಿಕಾರಿಗಳ ಸಭೆ ಬಗ್ಗೆ ಸಿಎಂ ಮಾಧ್ಯಮಗಳ ಜೊತೆಗೆ ಮಾತನಾಡುವ ಸಾಧ್ಯತೆಯಿದೆ. ಒಟ್ಟಾರೆ, ಪುಟ್ಟ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಜನರಲ್ಲಿ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ.


